ವಿಷಯಕ್ಕೆ ಹೋಗಿ

ನೀಲಿ ಗ್ರಹ ಭೂಮಿ

ಚಿತ್ರ: NASA, Apollo 17 Crew

'ಸೂರ್ಯ' ಎಂಬ ಹೆಸರಿನ ನಕ್ಷತ್ರದ ಸುತ್ತ ಸುತ್ತುತ್ತಿರುವ ಗ್ರಹಗಳಲ್ಲಿ‌ ಮೂರನೇ ಗ್ರಹ ನಮ್ಮ ಮೆಚ್ಚಿನ 'ಭೂಮಿ'ಯ ಚಿತ್ರ ಇಲ್ಲಿದೆ. ಗೋಳಾಕಾರದ ಭೂಮಿಯ ಬಹುಪಾಲು ಕಲ್ಲು-ಬಂಡೆಯಿಂದ ಕೂಡಿದೆ. ಭೂಮಿಯ ಮೇಲೆ 70 ಪ್ರತಿಶತ ನೀರು ಆವರಿಸಿದೆ. ಗ್ರಹದ ಪರಿಧಿಗೆ ಹೋಲಿಸಿದರೆ ತೆಳ್ಳಗಿನ ವಾತಾವರಣವನ್ನು ಹೊಂದಿದೆ ಮತ್ತು ಈ ವಾತಾವರಣ ಹೆಚ್ಚಾಗಿ ಸಾರಜನಕ ಮತ್ತು ಆಮ್ಲಜನಕದಿಂದ ಕೂಡಿದೆ. ಧರಣಿ, ಅವನಿ, ಇಳಾ, ಪೃಥ್ವಿ, ಕ್ಷಿತಿ, ಧರಿತ್ರಿ, ಸ್ಥಿರಾ, ಧರಾ, ವಸುಧಾ, ಮಹಿ, ಧರಣಿ, ಮೇದಿನಿ, ಉರ್ವಿ, ಕ್ಷಮಾ, ಜಗತೀ, ವಸುಂಧರಾ, ವಸುಮತಿ, ಧಾತ್ರಿ ಎಂದೆಲ್ಲಾ ಸುಂದರ ಹೆಸರುಗಳಿಂದ ಕರೆಯಲ್ಪಡುವ ಭೂಮಿಯ ಈ ಸುಂದರ ಚಿತ್ರವನ್ನು 1972 ರಲ್ಲಿ ಅಪೊಲೊ 17 ರಿಂದ ಸೆರೆಹಿಡಿಯಲಾಯಿತು. ಚಿತ್ರದಲ್ಲಿ ಆಫ್ರಿಕಾ ಮತ್ತು ಅಂಟಾರ್ಟಿಕಾ ಖಂಡವನ್ನು ಕಾಣಬಹುದು. ಈ ಚಿತ್ರ ಅತ್ಯಂತ ವ್ಯಾಪಕವಾಗಿ ಹಂಚಿಕೊಳ್ಳಲಾದ, ಹೆಚ್ಚು ವಿತರಿಸಲಾದ ಯಾವುದೇ ರೀತಿಯ ಛಾಯಾಚಿತ್ರಗಳಲ್ಲಿ ಒಂದು ಎಂದು ಭಾವಿಸಲಾಗಿದೆ. ಭೂಮಿಯ ಒಂದೇ ಒಂದು ದೊಡ್ಡ ಚಂದ್ರ, ಭೂ ವ್ಯಾಸದ ಸುಮಾರು 1/4ರಷ್ಟಿದೆ ಮತ್ತು ಭೂಮಿಯಿಂದ ಸೂರ್ಯನಷ್ಟೇ ಕೋನಿಯ ಗಾತ್ರದಲ್ಲಿ ಕಾಣುತ್ತದೆ. ದ್ರವರೂಪದಲ್ಲಿರುವ ನೀರು ಭೂಮಿಯನ್ನು ಜೀವಕೋಟಿಗಳನ್ನು ಸಲಹುವ, ನಮಗೆ ಇದುವರೆಗೆ ತಿಳಿದಿರುವ ಜೀವಿಗಳ ಏಕೈಕ ನೆಲೆಯಾಗಿಸಿದೆ. ನಮ್ಮ ಈ ಸುಂದರ ವಸುಂಧರೆಯನ್ನು ಜತನದಿಂದ ಕಾಪಾಡೋಣ.

(Astronomy Picture of the Day ವೆಬ್ಸೈಟ್ ನಲ್ಲಿ 2022, ಫೆಬ್ರವರಿ 6ರಂದು ಪ್ರಕಟವಾದ ಲೇಖನದ ಕನ್ನಡಾನುವಾದ)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಕ್ಕೆ - ಪ್ರಕೃತಿ ಸಂಭ್ರಮಿಸುವ ಪರಿ

ಏಪ್ರಿಲ್-ಮೇ ತಿಂಗಳು ಬಹುತೇಕ ಮರಗಳು ಹೊಸದಾಗಿ‌ ಚಿಗುರಿ ಪ್ರಕೃತಿ ಸಂಭ್ರಮಿಸುವ ಸಮಯ. ವಸಂತಕಾಲದ ಬೆಳಗಿನ ಹೊತ್ತು ಮರಗಳಲ್ಲಿ ತೂರಿಬರುವ ಸೂರ್ಯನ ಕಿರಣಗಳು ಬಣ್ಣ ಬಣ್ಣದ ಚಿಗುರೆಲೆ, ಹೂಗಳ ಮೇಲೆ ಬಿದ್ದು ಇಡೀ ವಾತಾವರಣವೇ ಪ್ರಜ್ವಲಿಸುತ್ತದೆ. ಮರಗಳಲ್ಲಿ ಎಲೆಗಳ ಚಿಗುರು ಕೆಂಪು, ತಿಳಿಹಸಿರು ಹೀಗೆ‌ ವಿವಿಧ ಬಣ್ಣದ್ದಾದರೆ, 'ಕಾಡಿನ ಬೆಂಕಿ' ಎಂದೇ ಕರೆಯಲಾಗುವ ಮುತ್ತುಗ, ಬೂರುಗ, ಮಂದಾರ ಮರಗಳಲ್ಲಿ ಅರಳುವ ಹೂಗಳ ಸೊಗಸು. 'ಚಿನ್ನದ ಮಳೆ' ಎಂದು ಹೆಸರಿಸುವ ಕಕ್ಕೆಯ ಮರದ ಹೂವಿನದ್ದೇ ಇನ್ನೊಂದು‌ ಸೊಗಸು. ಕಕ್ಕೆ ಮರದ ಮೂಲ ಭಾರತ ಉಪಖಂಡ. ನೆರೆಯ ಶ್ರೀಲಂಕಾ, ಮ್ಯಾನ್ಮಾರ್, ಪಾಕಿಸ್ತಾನ, ಥೈಲ್ಯಾಂಡ್ ದೇಶಗಳಲ್ಲಿಯೂ ಬೆಳೆಯುತ್ತದೆ. ಒಣ ಎಲೆಯುದುರುವ ಮತ್ತು ತೇವಾಂಶಭರಿತ ಎಲೆಯುದುರುವ ಪರಿಸರದಲ್ಲಿ‌ ಬೆಳೆಯುವ ಕಕ್ಕೆ ಮರ ಥೈಲ್ಯಾಂಡ್ ದೇಶದ ರಾಷ್ಟ್ರೀಯ ಮರ ಮತ್ತು ಅದರ ಹೂವು ರಾಷ್ಟ್ರೀಯ ಪುಷ್ಪ. ನಮ್ಮ ದೇಶದ ಕೇರಳ ರಾಜ್ಯದ ರಾಜ್ಯ ಪುಷ್ಪವೂ ಕಕ್ಕೆ. Cassia fistula ಕಕ್ಕೆ ಮರದ ವೈಜ್ಞಾನಿಕ ಹೆಸರು. ಸುಮಾರು 15-20 ಮೀಟರ್ ಎತ್ತರಕ್ಕೆ ಬೆಳೆಯುವ ಸಾಮಾನ್ಯ ಗಾತ್ರದ ಮರ. ಇದರ ಎಲೆಗಳು ಋತುಮಾನಕ್ಕೆ‌ ತಕ್ಕಂತೆ ಉದುರುವ (deciduous) ವರ್ಗಕ್ಕೆ ಸೇರಿದೆ. ಇದರ ಹಳದಿ ಹೂಗಳು 'ಪೆಂಡ್ಯೂಲಮ್'ನಂತೆ ಇಳಿಬಿಟ್ಟು, 4-7 ಸೆಂಟಿಮೀಟರ್ ವ್ಯಾಸವಿರುತ್ತದೆ. ಸಮಾನ ಗಾತ್ರದ 5 ಪಕಳೆಗಳಿರುತ್ತದೆ. ಇದು ದ್ವಿದಳ ಬೀಜಬ...

ಅತ್ತಿ

ನಾನು ಶಾಲೆಯಲ್ಲಿ ಓದುತ್ತಿದ್ದಾಗ ನಮ್ಮ ಶಾಲೆಯ ಮುಂದೆ ದೊಡ್ಡ ಮರವೊಂದಿತ್ತು. ಆ ಮರದ ಕೆಳಗೆ ಅದರ ಹಣ್ಣುಗಳು ಸದಾ ಬಿದ್ದಿರುತ್ತಿದ್ದವು. ಒಳ್ಳೆಯ ಪರಿಮಳವಿದ್ದ ಆ ಹಣ್ಣನ್ನು ತಿನ್ನಬಹುದೆ ಎಂಬ ಕುತೂಹಲದಿಂದ ಬಿಡಿಸಿದರೆ ಅದರ ತುಂಬಾ ಹುಳುಗಳು ಇದ್ದದ್ದು ನೋಡಿ ನಿರಾಸೆ ಉಂಟಾಯಿತು. ಕೆಳಗೆ ಬಿದ್ದ ಹಣ್ಣಾದ್ದರಿಂದ ಹುಳು ಹಿಡಿದಿದೆ ಮರದಿಂದ ನೇರವಾಗಿ ಕಿತ್ತ ಹಣ್ಣನ್ನು ತಿನ್ನಬಹುದು ಎಂಬ ದೂರದಾಸೆ ಇನ್ನೂ ಇತ್ತು ಆದರೆ ಕೈಗೆಟುಕುವ ಅಂತರದಲ್ಲಿ ಹಣ್ಣುಗಳು ಇರಲಿಲ್ಲ.

ಮಕರ ಸಂಕ್ರಾಂತಿ ಮತ್ತು ಉತ್ತರಾಯಣ

ಸಂಕ್ರಾಂತಿ ಹಬ್ಬವನ್ನು ಭಾರತದ ಬೇರೆ ಭಾಗಗಳಲ್ಲಿ ಬೇರೆ ಹೆಸರಿನಲ್ಲಿ ಆಚರಿಸುತ್ತಾರೆ . ಸಂಕ್ರಾಂತಿಯನ್ನು ಸಾಮಾನ್ಯವಾಗಿ ಉತ್ತರಾಯಣ ಪುಣ್ಯಕಾಲವೆಂದೂ ಆಚರಿಸುತ್ತಾರೆ . ಸಂಕ್ರಾಂತಿ ಮತ್ತು ಉತ್ತರಾಯಣ ನಡುವಿನ ಸಂಬಂಧವೇನು ? ಇದನ್ನು ತಿಳಿದುಕೊಳ್ಳಬೇಕಾದರೆ ಸಂಕ್ರಾಂತಿ ಮತ್ತು ಉತ್ತರಾಯಣ ಎಂದರೇನು ತಿಳಿಯೋಣ . ಮಕರ ಸಂಕ್ರಾಂತಿ : ಭೂಮಿಯು ಸೂರ್ಯನನ್ನು ಸುತ್ತುವ ಸಮತಲವನ್ನು ಅಂತರಿಕ್ಷಕ್ಕೆ ವಿಸ್ತರಿಸಿ ಆ ಕಾಲ್ಪನಿಕ ವೃತ್ತಕ್ಕೆ ಕ್ರಾಂತಿವೃತ್ತ (Ecliptc) ಎನ್ನಲಾಗಿದೆ . ಕ್ರಾಂತಿವೃತ್ತವನ್ನು ಸರಿಯಾಗಿ 12 ಭಾಗಗಳನ್ನಾಗಿ ವಿಭಜಿಸಿ , ಆ ಭಾಗಗಳನ್ನು ಕ್ರಮವಾಗಿ ಮೇಷರಾಶಿ , ವೃಷಭರಾಶಿ ,.. ಮೀನರಾಶಿಗಳೆಂದು ಕರೆಯುತ್ತೇವೆ . ಸೂರ್ಯನು ಒಂದೊಂದು ರಾಶಿಯನ್ನು ಪ್ರವೇಶಿಸುವ ಪರ್ವಕಾಲಕ್ಕೆ ಸಂಕ್ರಮಣ ಅಥವಾ ಸಂಕ್ರಾಂತಿ ಎಂದು ಹೆಸರು . ಈ 12 ರಾಶಿಗಳ ಗಣನೆಯು ಕ್ರಾಂತಿವೃತ್ತದಲ್ಲಿ ಬಿಂದುವೊಂದನ್ನು ಸ್ಥಿರವಾದ ಸ್ಥಾನವೆಂದು ಪರಿಗಣಿಸಿ , ಆ ಬಿಂದುವಿನಿಂದ ಆರಂಭಿಸಿ , ಭಾರತೀಯ ಸೌರಮಾನ ಪದ್ಧತಿಯಲ್ಲಿ ಸೂರ್ಯನು ಮೇಷರಾಶಿಯನ್ನು ಪ್ರವೇಶಮಾಡಿದ ಅಂದರೆ ಮೇಷ ಸಂಕ್ರಮಣದ ಸಮಯದಿಂದ ಸೌರವರ್ಷವು ಪ್ರಾರಂಭವಾಗುತ್ತದೆ . ಇದೇ ' ಸೌರಮಾನ ಯುಗಾದಿ ' ಎಂದು ಆಚರಿಸಲ್ಪಡುತ್ತದೆ . ಈ ಪದ್ಧತಿಯು ಮುಖ್ಯವಾಗಿ ತಮಿಳುನಾಡಿನಲ್ಲಿ ಚಲಾವಣೆಯಲ್ಲಿದೆ . ಕರ್ನಾಟಕದಲ್ಲಿಯೂ ಕೆಲವು ಭಾಗಗಳಲ್ಲಿ ಈ ಪದ್ಧತಿಯನ್ನು ಅನುಸರಿಸುತ್ತಾರೆ . ಈ ಸೌರವರ್ಷದ ಪ...