ವಿಷಯಕ್ಕೆ ಹೋಗಿ

ಕೃತ್ತಿಕಾ: ಸಪ್ತ ಸಹೋದರಿಯರ ನಕ್ಷತ್ರ ಸಮೂಹ

 

ಚಿತ್ರ: Damien Cannane (APOD)

ನೀವು ಎಂದಾದರೂ ಕೃತ್ತಿಕಾ (Pleiades) ನಕ್ಷತ್ರ ಸಮೂಹವನ್ನು ನೋಡಿದ್ದೀರಾ? ಬಹುಶಃ ಈ ಚಿತ್ರದಲ್ಲಿರುವಂತೆ ದೊಡ್ಡದಾಗಿ ಮತ್ತು ಸ್ಪಷ್ಟವಾಗಿ ನೋಡಿಲ್ಲದಿರಬಹುದು. ಆಕಾಶದಲ್ಲಿ ಅತ್ಯಂತ ಪ್ರಸಿದ್ಧವಾದ ಕೃತ್ತಿಕಾ ನಕ್ಷತ್ರ ಸಮೂಹದ ಪ್ರಕಾಶಮಾನವಾದ ನಕ್ಷತ್ರಗಳನ್ನು ನಗರದ ಬೆಳಕು ಮತ್ತು ವಾಯು ಮಾಲಿನ್ಯವಿರುವ ಸ್ಥಳದಿಂದಲೂ  ದೂರದರ್ಶಕವಿಲ್ಲದೆ ಬರಿಗಣ್ಣಿನಲ್ಲೇ ನೋಡಬಹುದು. ಬೆಳಕು ಮತ್ತು ಮಾಲಿನ್ಯರಹಿತವಾದ ಸ್ಥಳದಿಂದ ನೋಡಿದರೆ ಕೃತ್ತಿಕಾ ನಕ್ಷತ್ರ ಸಮೂಹವನ್ನು ಸುತ್ತುವರೆದಿರುವ ಧೂಳಿನ ಮೋಡವೂ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಚಿತ್ರವನ್ನು ಉತ್ತರ ಅಮೇರಿಕಾದ ಫ್ಲೋರಿಡಾದಲ್ಲಿ ತೆಗೆಯಲಾಗಿದೆ. ಕೃತ್ತಿಕಾ ನಕ್ಷತ್ರ ಸಮೂಹವು ಹುಣ್ಣಿಮೆಯ ಪೂರ್ಣ ಚಂದ್ರನ ಕೋನಿಯ ಗಾತ್ರಕ್ಕಿಂತಲೂ ಹಲವು ಪಟ್ಟು ದೊಡ್ಡದು. ಸಪ್ತ ಸಹೋದರಿಯರು (Seven Sisters) ಮತ್ತು ಎಂ45 ಎಂದೂ ಕರೆಯಲ್ಪಡುವ ಈ ನಕ್ಷತ್ರ ಸಮೂಹ ವೃಷಭ ರಾಶಿಯೆಡೆಗೆ ಸುಮಾರು 400 ಬೆಳಕಿನ ವರ್ಷಗಳ ದೂರದಲ್ಲಿದೆ. ಈ ನಕ್ಷತ್ರ ಸಮೂಹಕ್ಕೆ 'ಸಪ್ತ ಸಹೋದರಿಯರು' ಎಂದು ಹೆಸರಿಸಿದ ಮೇಲೆ ಅದರಲ್ಲಿನ ಒಂದು ಪ್ರಕಾಶಮಾನವಾದ ನಕ್ಷತ್ರ ಮಂಕಾಗಿ ಬರಿಗಣ್ಣಿಗೆ ಕಾಣದಂತಾಯ್ತು. ಹೀಗಾಗಿ ಒಟ್ಟು ಆರು ಪ್ರಕಾಶಮಾನ ನಕ್ಷತ್ರಗಳನ್ನು ಮಾತ್ರ ಇಂದು ನೋಡಬಹುದು. ಆದರೂ ನೋಡುವ ಸ್ಥಳ ಮತ್ತು ವೀಕ್ಷಕನ ದೃಷ್ಟಿಯ ಸ್ಪಷ್ಟತೆಯನ್ನು ಅವಲಂಬಿಸಿ ಈ ನಕ್ಷತ್ರ ಸಮೂಹದಲ್ಲಿ ಏಳು ಅಥವಾ ಹೆಚ್ಚು ನಕ್ಷತ್ರಗಳು ಕಾಣಬಹುದು. ಕೃತ್ತಿಕಾ ನಕ್ಷತ್ರ ಸಮೂಹದಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ನಕ್ಷತ್ರಗಳಿವೆ.

(Astronomy Picture of the Day ವೆಬ್ಸೈಟ್ ನಲ್ಲಿ 2021, ನವೆಂಬರ್ 24ರಂದು ಪ್ರಕಟವಾದ ಲೇಖನದ ಕನ್ನಡಾನುವಾದ)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಕ್ಕೆ - ಪ್ರಕೃತಿ ಸಂಭ್ರಮಿಸುವ ಪರಿ

ಏಪ್ರಿಲ್-ಮೇ ತಿಂಗಳು ಬಹುತೇಕ ಮರಗಳು ಹೊಸದಾಗಿ‌ ಚಿಗುರಿ ಪ್ರಕೃತಿ ಸಂಭ್ರಮಿಸುವ ಸಮಯ. ವಸಂತಕಾಲದ ಬೆಳಗಿನ ಹೊತ್ತು ಮರಗಳಲ್ಲಿ ತೂರಿಬರುವ ಸೂರ್ಯನ ಕಿರಣಗಳು ಬಣ್ಣ ಬಣ್ಣದ ಚಿಗುರೆಲೆ, ಹೂಗಳ ಮೇಲೆ ಬಿದ್ದು ಇಡೀ ವಾತಾವರಣವೇ ಪ್ರಜ್ವಲಿಸುತ್ತದೆ. ಮರಗಳಲ್ಲಿ ಎಲೆಗಳ ಚಿಗುರು ಕೆಂಪು, ತಿಳಿಹಸಿರು ಹೀಗೆ‌ ವಿವಿಧ ಬಣ್ಣದ್ದಾದರೆ, 'ಕಾಡಿನ ಬೆಂಕಿ' ಎಂದೇ ಕರೆಯಲಾಗುವ ಮುತ್ತುಗ, ಬೂರುಗ, ಮಂದಾರ ಮರಗಳಲ್ಲಿ ಅರಳುವ ಹೂಗಳ ಸೊಗಸು. 'ಚಿನ್ನದ ಮಳೆ' ಎಂದು ಹೆಸರಿಸುವ ಕಕ್ಕೆಯ ಮರದ ಹೂವಿನದ್ದೇ ಇನ್ನೊಂದು‌ ಸೊಗಸು. ಕಕ್ಕೆ ಮರದ ಮೂಲ ಭಾರತ ಉಪಖಂಡ. ನೆರೆಯ ಶ್ರೀಲಂಕಾ, ಮ್ಯಾನ್ಮಾರ್, ಪಾಕಿಸ್ತಾನ, ಥೈಲ್ಯಾಂಡ್ ದೇಶಗಳಲ್ಲಿಯೂ ಬೆಳೆಯುತ್ತದೆ. ಒಣ ಎಲೆಯುದುರುವ ಮತ್ತು ತೇವಾಂಶಭರಿತ ಎಲೆಯುದುರುವ ಪರಿಸರದಲ್ಲಿ‌ ಬೆಳೆಯುವ ಕಕ್ಕೆ ಮರ ಥೈಲ್ಯಾಂಡ್ ದೇಶದ ರಾಷ್ಟ್ರೀಯ ಮರ ಮತ್ತು ಅದರ ಹೂವು ರಾಷ್ಟ್ರೀಯ ಪುಷ್ಪ. ನಮ್ಮ ದೇಶದ ಕೇರಳ ರಾಜ್ಯದ ರಾಜ್ಯ ಪುಷ್ಪವೂ ಕಕ್ಕೆ. Cassia fistula ಕಕ್ಕೆ ಮರದ ವೈಜ್ಞಾನಿಕ ಹೆಸರು. ಸುಮಾರು 15-20 ಮೀಟರ್ ಎತ್ತರಕ್ಕೆ ಬೆಳೆಯುವ ಸಾಮಾನ್ಯ ಗಾತ್ರದ ಮರ. ಇದರ ಎಲೆಗಳು ಋತುಮಾನಕ್ಕೆ‌ ತಕ್ಕಂತೆ ಉದುರುವ (deciduous) ವರ್ಗಕ್ಕೆ ಸೇರಿದೆ. ಇದರ ಹಳದಿ ಹೂಗಳು 'ಪೆಂಡ್ಯೂಲಮ್'ನಂತೆ ಇಳಿಬಿಟ್ಟು, 4-7 ಸೆಂಟಿಮೀಟರ್ ವ್ಯಾಸವಿರುತ್ತದೆ. ಸಮಾನ ಗಾತ್ರದ 5 ಪಕಳೆಗಳಿರುತ್ತದೆ. ಇದು ದ್ವಿದಳ ಬೀಜಬ...

ಅತ್ತಿ

ನಾನು ಶಾಲೆಯಲ್ಲಿ ಓದುತ್ತಿದ್ದಾಗ ನಮ್ಮ ಶಾಲೆಯ ಮುಂದೆ ದೊಡ್ಡ ಮರವೊಂದಿತ್ತು. ಆ ಮರದ ಕೆಳಗೆ ಅದರ ಹಣ್ಣುಗಳು ಸದಾ ಬಿದ್ದಿರುತ್ತಿದ್ದವು. ಒಳ್ಳೆಯ ಪರಿಮಳವಿದ್ದ ಆ ಹಣ್ಣನ್ನು ತಿನ್ನಬಹುದೆ ಎಂಬ ಕುತೂಹಲದಿಂದ ಬಿಡಿಸಿದರೆ ಅದರ ತುಂಬಾ ಹುಳುಗಳು ಇದ್ದದ್ದು ನೋಡಿ ನಿರಾಸೆ ಉಂಟಾಯಿತು. ಕೆಳಗೆ ಬಿದ್ದ ಹಣ್ಣಾದ್ದರಿಂದ ಹುಳು ಹಿಡಿದಿದೆ ಮರದಿಂದ ನೇರವಾಗಿ ಕಿತ್ತ ಹಣ್ಣನ್ನು ತಿನ್ನಬಹುದು ಎಂಬ ದೂರದಾಸೆ ಇನ್ನೂ ಇತ್ತು ಆದರೆ ಕೈಗೆಟುಕುವ ಅಂತರದಲ್ಲಿ ಹಣ್ಣುಗಳು ಇರಲಿಲ್ಲ.

ಮಕರ ಸಂಕ್ರಾಂತಿ ಮತ್ತು ಉತ್ತರಾಯಣ

ಸಂಕ್ರಾಂತಿ ಹಬ್ಬವನ್ನು ಭಾರತದ ಬೇರೆ ಭಾಗಗಳಲ್ಲಿ ಬೇರೆ ಹೆಸರಿನಲ್ಲಿ ಆಚರಿಸುತ್ತಾರೆ . ಸಂಕ್ರಾಂತಿಯನ್ನು ಸಾಮಾನ್ಯವಾಗಿ ಉತ್ತರಾಯಣ ಪುಣ್ಯಕಾಲವೆಂದೂ ಆಚರಿಸುತ್ತಾರೆ . ಸಂಕ್ರಾಂತಿ ಮತ್ತು ಉತ್ತರಾಯಣ ನಡುವಿನ ಸಂಬಂಧವೇನು ? ಇದನ್ನು ತಿಳಿದುಕೊಳ್ಳಬೇಕಾದರೆ ಸಂಕ್ರಾಂತಿ ಮತ್ತು ಉತ್ತರಾಯಣ ಎಂದರೇನು ತಿಳಿಯೋಣ . ಮಕರ ಸಂಕ್ರಾಂತಿ : ಭೂಮಿಯು ಸೂರ್ಯನನ್ನು ಸುತ್ತುವ ಸಮತಲವನ್ನು ಅಂತರಿಕ್ಷಕ್ಕೆ ವಿಸ್ತರಿಸಿ ಆ ಕಾಲ್ಪನಿಕ ವೃತ್ತಕ್ಕೆ ಕ್ರಾಂತಿವೃತ್ತ (Ecliptc) ಎನ್ನಲಾಗಿದೆ . ಕ್ರಾಂತಿವೃತ್ತವನ್ನು ಸರಿಯಾಗಿ 12 ಭಾಗಗಳನ್ನಾಗಿ ವಿಭಜಿಸಿ , ಆ ಭಾಗಗಳನ್ನು ಕ್ರಮವಾಗಿ ಮೇಷರಾಶಿ , ವೃಷಭರಾಶಿ ,.. ಮೀನರಾಶಿಗಳೆಂದು ಕರೆಯುತ್ತೇವೆ . ಸೂರ್ಯನು ಒಂದೊಂದು ರಾಶಿಯನ್ನು ಪ್ರವೇಶಿಸುವ ಪರ್ವಕಾಲಕ್ಕೆ ಸಂಕ್ರಮಣ ಅಥವಾ ಸಂಕ್ರಾಂತಿ ಎಂದು ಹೆಸರು . ಈ 12 ರಾಶಿಗಳ ಗಣನೆಯು ಕ್ರಾಂತಿವೃತ್ತದಲ್ಲಿ ಬಿಂದುವೊಂದನ್ನು ಸ್ಥಿರವಾದ ಸ್ಥಾನವೆಂದು ಪರಿಗಣಿಸಿ , ಆ ಬಿಂದುವಿನಿಂದ ಆರಂಭಿಸಿ , ಭಾರತೀಯ ಸೌರಮಾನ ಪದ್ಧತಿಯಲ್ಲಿ ಸೂರ್ಯನು ಮೇಷರಾಶಿಯನ್ನು ಪ್ರವೇಶಮಾಡಿದ ಅಂದರೆ ಮೇಷ ಸಂಕ್ರಮಣದ ಸಮಯದಿಂದ ಸೌರವರ್ಷವು ಪ್ರಾರಂಭವಾಗುತ್ತದೆ . ಇದೇ ' ಸೌರಮಾನ ಯುಗಾದಿ ' ಎಂದು ಆಚರಿಸಲ್ಪಡುತ್ತದೆ . ಈ ಪದ್ಧತಿಯು ಮುಖ್ಯವಾಗಿ ತಮಿಳುನಾಡಿನಲ್ಲಿ ಚಲಾವಣೆಯಲ್ಲಿದೆ . ಕರ್ನಾಟಕದಲ್ಲಿಯೂ ಕೆಲವು ಭಾಗಗಳಲ್ಲಿ ಈ ಪದ್ಧತಿಯನ್ನು ಅನುಸರಿಸುತ್ತಾರೆ . ಈ ಸೌರವರ್ಷದ ಪ...